ಅತ್ತಿಬೆಲೆ ಪಟಾಕಿ ಪ್ರಕರಣ: ಸಿಐಡಿ ತನಿಖೆಗೆ ಸಿಎಂ ಆದೇಶ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

Advertisement

ಬೆಂಗಳೂರು: ಅತ್ತಿಬೆಲೆಯಲ್ಲಿ ಅಗ್ನಿದುರಂತ ಸಂಭವಿಸಿದ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್, ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಎಸ್ ಟಿ ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅತ್ತಿಬೆಲೆಯ ಅಗ್ನಿದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು.
ಅತ್ತಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5 ಲಕ್ಷ ರೂ.ಗಳನ್ನು ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು. ಅಕ್ಟೋಬರ್ 07 ರಂದು ಸುಮಾರು ಮಧ್ಯಾಹ್ನ 3.15 ರಿಂದ 3.30ರ ವೇಳೆ ಬೆಂಕಿ ಅನಾಹುತ ನಡೆದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ರಾಮುಸ್ವಾಮಿರೆಡ್ಡಿ ಎಂಬುವರು ಪರವಾನಗಿ ಪಡೆದು ಪಟಾಕಿ ಮಾರಾಟದ ವ್ಯವಹಾರ ಮಾಡುತ್ತಿದ್ದರು. ನಿನ್ನೆ 3 ಗಂಟೆ ಸಮಯದಲ್ಲಿ ತಮಿಳುನಾಡಿನಿಂದ ಟ್ರಕ್‌ಗಳಲ್ಲಿ ಪಟಾಕಿಗಳು ಬಂದಿದ್ದು, ಬೆಂಕಿ ಹೇಗೆ ಪಟಾಕಿಗೆ ತಗುಲಿತು ಎನ್ನುವ ನಿಖರ ಕಾರಣ ತಿಳಿದುಬಂದಿಲ್ಲ. ಅಧಿಕಾರಿಗಳು ಇಲ್ಲಿ ಪರಿಶೀಲಿಸಿದ ಮೇಲೆ, ಸ್ಪೋಟಕಗಳ ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂದು ಕಂಡುಬಂದಿದೆ. ಪರವಾನಾಗಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ದಿ.13.9.2023 ರಂದು ನವೀಕರಿಸಲಾಗಿದೆ. ದಿ:31.10.2028 ರವರೆಗೆ ಜಾರಿಯಲ್ಲಿದೆ. ಮತ್ತೊಂದು ಪರವಾನಗಿ 18.1.2021 ರಂದು 28.1.2026 ರವರೆಗೆ ಜಾರಿಯಲ್ಲಿರಲಿದೆ. ಜಯಮ್ಮ, ಕೋಂ ದಿ. ಸಿದ್ದಾರೆಡ್ಡಿ, ಅನಿಲ್ ರೆಡ್ಡಿ ಬಿನ್ ಸಿದ್ದಾರೆಡ್ಡಿ ಎಂಬುವವರು ಈ ಸ್ಥಳದ ಮಾಲೀಕರು.
ಗೋದಾಮಿನ ಸ್ಥಳ ಬಹಳ ಕಿರಿದಾಗಿದ್ದು, ಇದರಲ್ಲಿ 14 ಜನರು ಮೃತಪಟ್ಟಿದ್ದಾರೆ. ಎಲ್ಲರೂ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿಯವರು. ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳು. ರಜಾ ಸಮಯದಲ್ಲಿ ಓದಿಗಾಗಿ ಹಣ ಸಂಪಾದನೆಗಾಗಿ ಬಂದವರು. ಒಬ್ಬ ಮ್ಯಾನೇಜರನ್ನು ಹೊರತುಪಡಿಸಿ ಯಾರೂ ಖಾಯಂ ನೌಕರರಿಲ್ಲ. ಸ್ಫೋಟಕಗಳಿಗೆ ಅಗತ್ಯವಾದ ಯಾವುದೇ ಸುರಕ್ಷಾ ಕ್ರಮಗಳನ್ನು ಕೈಗೊಂಡಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕು. ಹಿಂಭಾಗದಲ್ಲಿ 200 ಅಡಿಗಳವರೆಗೂ ಗೋದಾಮು ಇದೆ. ಎಲ್ಲೂ ಕೂಡ ಅಗ್ನಿ ಶಾಮಕಗಳನ್ನು ಅಳವಡಿಸಿಲ್ಲ. ಒಟ್ಟಾರೆ ಮೇಲ್ನೋಟಕ್ಕೆ ಪರವಾನಗಿ ಹೊಂದಿದವರ ನಿರ್ಲಕ್ಷ್ಯ ಎದ್ದುಕಾಣುತ್ತಿದೆ. ಘಟನೆಯ ತನಿಖೆ ಕೈಗೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆ. 14 ಜನ ಮೃತಪಟ್ಟಿರುವುದು ದೊಡ್ಡ ದುರಂತ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರೆಲ್ಲರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಮತ್ತೆ ಇಂತಹ ದುರ್ಘಟನೆಗಳು ಮರುಕಳಿಸದಿರಲಿ ಎಂದು ಪ್ರಾರ್ಥಿಸುತ್ತೇನೆ.


ರಾಮುಸ್ವಾಮಿರೆಡ್ಡಿ, ನವೀನ್, ಅನಿಲ್ ರೆಡ್ಡಿ ಎಂಬುವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 285, 286, 337, 338, 437, 304 ಎಫ್ ಐ.ಆರ್ ಕೂಡ ದಾಖಲಾಗಿದೆ. ಪ್ರಕರಣದ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳನ್ನು ವಿಚಾರಿಸಿದಾಗ ಅಗ್ನಿಶಾಮಕ ದಳ ಹಾಗೂ ಪೊಲೀಸ್ ನಿರಾಕ್ಷೇಪಣಾ ಪತ್ರ ನೀಡಿದ್ದರು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕಾಗಿತ್ತು. ನಿರಾಕ್ಷೇಪಣಾ ಪತ್ರ ನೀಡಿದವರು ಸ್ಫೋಟಕಗಳ ಕಾಯ್ದೆಯಲ್ಲಿನ ಅಗತ್ಯಗಳನ್ನು ನೋಡಿ ಕೊಡಬೇಕಿತ್ತು. ಏಕೆಂದರೆ ಪರವಾನಗಿಯನ್ನು ಸ್ಫೋಟಕಗಳ ಕಾಯ್ದೆಯಡಿಯಲ್ಲಿ ನೀಡಲಾಗಿದೆ. ಜಿಲ್ಲಾಧಿಕಾರಿಗಳೂ ಕೂಡ ಸ್ಥಳ ಪರಿಶೀಲನೆ ಮಾಡಿ ನೀಡಬೇಕಿತ್ತು. ಈ ಬಗ್ಗೆ ಸೂಕ್ತ ಪರಿಶೀಲನೆಯಾಗಬೇಕು.
ದೀಪಾವಳಿ ಹಬ್ಬ ಹತ್ತಿರವಿರುವುದರಿಂದ ಮುಂದೆ ಅಗತ್ಯ ಕ್ರಮಗಳನ್ನು ಚರ್ಚೆ ಮಾಡಿ ಕೈಗೊಳ್ಳಲಾಗುವುದು. ತಮಿಳುನಾಡಿನ ಆರೋಗ್ಯ ಸಚಿವರೂ ಆಗಮಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅವರೂ ಕೂಡ ತಲಾ 3 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ ಎಂದರು.