ಉಗ್ರ ಸಂಪರ್ಕ – ಮತ್ತಿಬ್ಬರ ಸೆರೆ

Arrest
Advertisement

ಮಂಗಳೂರು: ನಿಷೇಧಿತ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್ ಸ್ಟೇಟ್‌ನೊಂದಿಗೆ ಸಂಪರ್ಕ ಹೊಂದಿ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದಲ್ಲಿ ಮತ್ತಿಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ.
ಬಂಧಿತರನ್ನು ಮಂಗಳೂರು ಉಳ್ಳಾಲತೊಕ್ಕೊಟ್ಟು ಪೆರ್ಮನ್ನೂರು ಹೀರಾ ಕಾಲೇಜು ಬಳಿಯ ನಿವಾಸಿ ಮಜೀನ್ ಅಬ್ದುಲ್ ರಹಮಾನ್ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ದೇವನಾಯಕನಹಳ್ಳಿಯ ನೂರಾನಿ ಮಸೀದಿ ಬಳಿಯ ನಿವಾಸಿ ನದೀಮ್ ಅಹಮದ್ ಕೆ.ಎ. ಎಂದು ಗುರುತಿಸಲಾಗಿದೆ. ಈ ಕುರಿತು ಎನ್‌ಐಎ ಟ್ವೀಟ್ ಮಾಡಿದೆ.
ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ ನಗರದ ಮಾಝ್ ಮುನೀರ್ ಅಹಮದ್ ಹಾಗೂ ಶಿವಮೊಗ್ಗದ ಸಿದ್ದೇಶ್ವರ ನಗರದ ಸಯ್ಯದ್ ಯಾಸೀನ್‌ನನ್ನು ಶಿವಮೊಗ್ಗ ಜಿಲ್ಲೆಯ ಪೊಲೀಸರು ಬಂಧಿಸಿದ್ದರು. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ೨೦೨೨ರ ಸೆ. ೧೯ರಂದು ಪ್ರಕರಣ ದಾಖಲಾಗಿ ತನಿಖೆಯ ಭಾಗವಾಗಿ ಈ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.
’ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಪ್ರಕರಣದ ಪ್ರಮುಖ ಆರೋಪಿ ಮಾಝ್ ಮುನೀರ್ ಎಂಬಾತ ಮಜೀನ್ ಅಬ್ದುಲ್ ರಹಮಾನ್‌ನನ್ನು ಹಾಗೂ ಇನ್ನೊಬ್ಬ ಆರೋಪಿ ಸಯ್ಯದ್ ಯಾಸಿನ್ ಎಂಬಾತ ನದೀಮ್ನನ್ನು ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ನ ಭಯೋತ್ಪಾದನಾ ಚಟುವಟಿಕೆಗಳನ್ನು ಮುಂದುವರಿಸಲು ತಮ್ಮ ತಂಡಕ್ಕೆ ಸೇರಿಸಿದ್ದರು. ಬಂಧಿತ ಆರೋಪಿಗಳಿಬ್ಬರೂ ಭಾರಿ ಭಯೋತ್ಪಾದನಾ ಚಟುವಟಿಕೆ ನಡೆಸುವ ಇಸ್ಲಾಮಿಕ್ ಸ್ಟೇಟ್ಸ್ ಸಂಚಿನ ಭಾಗವಾಗಿ ಅನೇಕ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಯತ್ನಗಳಲ್ಲಿ ತೊಡಗಿಸಿಕೊಂಡಿದ್ದರು’ ಎಂದು ಎನ್‌ಐಎ ಹೇಳಿದೆ.
ಮಾಝ್ ಮುನೀರ್ ಹಾಗೂ ಸಯ್ಯದ್ ಯಾಸೀನ್ ಜೊತೆ ಸಂಪರ್ಕ ಹೊಂದಿದ್ದ ಶಿವಮೊಗ್ಗದ ಟಿಪ್ಪು ಸುಲ್ತಾನ್ ನಗರದ ಹುಝೈರ್ ಫರ್ಹಾನ್ ಬೇಗ್ ಮತ್ತು ಉಡುಪಿ ಜಿಲ್ಲೆ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಶಾಂತಿನಗರದ ರೇಷಾನ್ ತಾಜುದ್ದೀನ್ ಶೇಖ್‌ನನ್ನು ಎನ್‌ಐಎ ಅಧಿಕಾರಿಗಳ ತಂಡ ೨೦೨೩ರ ಜ.೫ರಂದು ಬಂಧಿಸಿತ್ತು.