ಕಾಂಗ್ರೆಸ್ ಶಾಸಕಿ ಬಿಜೆಪಿಗೆ ಸೇರ್ಪಡೆ

Advertisement

ತಮಿಳುನಾಡಿನ ವಿಲವಂಕೋಡ್ ವಿಧಾನಸಭೆ ಕಾಂಗ್ರೆಸ್ ಶಾಸಕಿ ಎಸ್ ವಿಜಯಧರಣಿ ಅವರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಸೇರಿದಂತೆ ಇತರೆ ನಾಯಕರ ಸಮ್ಮುಖದಲ್ಲಿ ವಿಜಯಧರಣಿ ಅವರು ಬಿಜೆಪಿಗೆ ಸೇರಿದ್ದಾರೆ. ವಿಲವಂಕೋಡ್ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಜಯಧರಣಿ ಅವರು ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಇತ್ತಿಚೆಗೆ ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಬಿಜೆಪಿ ಸೇರಿದ ನಂತರ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಧರಣಿ, ನಾನು ಬಾಲ್ಯದಿಂದಲೂ ಕಾಂಗ್ರೆಸ್‌ನ ಭಾಗವಾಗಿದ್ದೇನೆ. ಈಗ ಬಿಜೆಪಿ ಸೇರುವ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಿಂದಾಗಿ ನಾನು ಕೂಡ ಬಿಜೆಪಿ ಸೇರಿದ್ದೇನೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸೋಣ. ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ಚೆನ್ನಾಗಿ ಬೆಳೆಸುತ್ತಿದ್ದಾರೆ. ಬಿಜೆಪಿಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.