ಚನ್ನಗಿರಿ: ಮಟ್ಕಾ ಆಡಿಸಿದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆದೀಲ್ ಎಂಬ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನ್ಯಾಯಾಧೀಶರ ಸಮ್ಮುಖದಲ್ಲಿ ಶನಿವಾರ ನಡೆದಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರ ಪ್ರಾಥಮಿಕ ವರದಿ ಪ್ರಕಾರ ಸಹಜ ಸಾವು ಆಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಆತನ ಹೃದಯದಲ್ಲಿ ರಕ್ತನಾಳಗಳು ಬ್ಲಾಕ್ ಆಗಿದ್ದರಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ. ಮಟ್ಕಾ ಆಡಿಸಿದ ಆರೋಪದ ಮೇಲೆ ಪೊಲೀಸರು ಆದೀಲ್ ಅವರನ್ನು ವಿಚಾರಣೆಗೆ ಕರೆದುಕೊಂಡು ಠಾಣೆಗೆ ಬಂದ ಕೆಲವೇ ಸೆಕೆಂಡ್ ನಲ್ಲಿ ಕುಸಿದು ಬಿದ್ದಿದ್ದು, ಕೂಡಲೇ ಆಸ್ಪತ್ರೆಗೆ ಸಾಗಿಸುವಾಗ ಈ ಘಟನೆ ನಡೆದಿದೆ. ಈ ಎಲ್ಲಾ ಘಟನೆಗಳು ಠಾಣೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ್ದಾರೆ.