ಜನರ ಬಳಿಗೆ ಆಡಳಿತ: ಇದು ನಮ್ಮ ಸರ್ಕಾರದ ಬದ್ಧತೆ

Advertisement

ಕಲಬುರಗಿ: ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ‌ ಬಳಿ ಬರುವ ಬದಲು ಸರ್ಕಾರವೇ ಜನರ ಬಳಿಗೆ ಬರುವ ವಿನೂತನ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ಜಿಲ್ಲೆಯ ಚಿಂಚೋಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ‌ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.


” ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಜನರ ಸಮಸ್ಯೆಗಳ ಪರಿಹಾರಕ್ಕೆ ಸರ್ವ ಪ್ರಯತ್ನ ನಡೆಸುತ್ತಿದ್ದು ಆಡಳಿತವನ್ನೇ ನಿಮ್ಮ ಮನೆಬಾಗಿಲಿಗೆ ಕರೆದುಕೊಂಡು ಬಂದು ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನ ನಡೆಸುತ್ತಿದ್ದೇವೆ. ಇದು ನಮ್ಮ ಸರ್ಕಾರದ ಬದ್ದತೆಯಾಗಿದೆ. ನಾವು ನುಡಿದಂತೆ ನಡೆಯುತ್ತಿದ್ದೇವೆ ” ಎಂದು ಹೇಳಿದರು.
ಕಲಬುರಗಿ ಕನೆಕ್ಟ್ ಎನ್ನುವ QR code ಸ್ಥಾಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು QR ಕೋಡ್ ಮೂಲಕ ಜಿಲ್ಲಾಡಳಿತಕ್ಕೆ ಸಲ್ಲಿಸಬಹುದು ಎಂದು ಹೇಳಿದ ಸಚಿವರು, ಒಂದು ತಿಂಗಳ ಅವಧಿಯಲ್ಲಿ QR ಕೋಡ್ ಮೂಲಕ 560 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಅವುಗಳಲ್ಲಿ 300 ಅರ್ಜಿಗಳಿಗೆ ಪರಿಹಾರ ಸೂಚಿಸಿ ವಿಲೇವಾರಿ ಮಾಡಲಾಗಿದೆ ಎಂದರು. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಲಾಗಿದೆ. ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಹಾಗೂ ಶಕ್ತಿಯೋಜನಗೆಳ ಅಡಿಯಲ್ಲಿ ಈ ರಾಜ್ಯದ ಬಡವರ ಮಧ್ಯಮ ವರ್ಗದ ಜನರಿಗೆ ಯೋಜನೆಗಳ ಲಾಭ ತಲುಪಿಸಲಾಗಿದೆ. ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ಮಂಡಳಿಗೆ ರೂ 5,000 ಕೋಟಿ ವಾರ್ಷಿಕ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದೇವು ಅದರಲ್ಲಿ ಈಗಾಗಲೇ ರೂ 3000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.


ಉದ್ಯೋಗ ಖಾತ್ರಿ ಯೋಜನೆಯ ಫಲಾನುಭವಿಗಳು ಕೆಲಸ ಮಾಡಲು ಹೋದಾಗ ಅವರ ಮಕ್ಕಳ ಪಾಲನೆ ಮಾಡಲು ಕೂಸಿನ ಮನೆ ಎನ್ನುವ ನೂತನ ಯೋಜನೆ ಜಾರಿಗೆ ತರಲಾಗಿದೆ. ಇಲ್ಲಿ ಅಂತಹ ಮಕ್ಕಳನ್ನು ನೋಡಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿ ಯುವಕ ಯುವತಿಯರು ಕೆಎ ಎಸ್ ಹಾಗೂ ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಅವರಿಗೆ ತರಬೇತಿ ನೀಡಲು ” ನೈಸ್ ” ( NICE – Nagavi Institute of Competitive Examinations) ಹೆಸರಿನಲ್ಲಿ ತರಬೇತಿ ಸಂಸ್ಥೆಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಮಹಿಳೆಯರಿಗಾಗಿ ರೂ 30 ಲಕ್ಷ ವೆಚ್ಚದಲ್ಲಿ ಶೌಚಾಲಯ ಸ್ಥಾಪನೆಯನ್ನು ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ 400 ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಇಂತಹ ಶೌಚಾಲಯ ನಿರ್ವಹಣೆಯ ಜವಾಬ್ದಾರಿಯನ್ನು ಗ್ರಾಮಪಂಚಾಯತಗಳಿಗೆ ವಹಿಸಲಾಗುತ್ತಿದ್ದು, ಜಿಪಂ ಸಿಇಓ ಈ ನಿಟ್ಟಿನಲ್ಲಿ ಸಂಬಂಧಿಸಿದ ಗ್ರಾಪಂ ಗಳಿಗು ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.