ಜನಸ್ಪಂದನ ಒಂದು ದಿನಕ್ಕೆ ಸೀಮಿತವಲ್ಲ, ನಿರಂತರ ಪ್ರಕ್ರಿಯೆ

Advertisement

ಬೆಂಗಳೂರು: ಜನಸ್ಪಂದನ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಿಲ್ಲ. ಜನರ ಅಹವಾಲುಗಳಿಗೆ ಸಕಾರಾತ್ಮಕ ಪರಿಹಾರ ದೊರಕಿಸುವ ಒಂದು ನಿರಂತರ ಪ್ರಕ್ರಿಯೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನ ಗಂಗನಾಳ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಒಳಚರಂಡಿ ವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಮತ್ತು ನೀರು ಸರಬರಾಜಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿತ್ತು.

ಈ ವಿಚಾರವು ನಮ್ಮ ಅಧಿಕಾರಿಗಳ ಗಮನಕ್ಕೆ ಬಂದ ಕೆಲವೇ ಗಂಟೆಗಳ ಒಳಗೆ ಯಾದಗಿರಿ ಜಿಲ್ಲಾಧಿಕಾರಿಗಳಿಗೆ ಶಾಲೆಯ ಸಮಸ್ಯೆಗಳನ್ನು ಸರಿಪಡಿಸುವಂತೆ ದೂರವಾಣಿ ಮುಖಾಂತರ ಸೂಚಿಸಿ, ಕುಡಿಯುವ ನೀರು, ಬಿಸಿಯೂಟ ಮತ್ತು ಶೌಚಾಲಯಕ್ಕಾಗಿ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ನಮ್ಮ ಅಧಿಕಾರಿಗಳ ಸೂಚನೆಯ ಮೇರೆಗೆ ತುರ್ತು ಕಾಮಗಾರಿಯನ್ನು ಕೈಗೊಂಡು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗಿದೆ.

ಈ ಪ್ರಕರಣವನ್ನು ಪರಿಹರಿಸುವುದರ ಜೊತೆಗೆ ರಾಜ್ಯದ ಇತರೆ ಶಾಲೆಗಳಿಗೂ ಮೂಲಭೂತ ಸೌಕರ್ಯಗಳನ್ನು ಆದ್ಯತೆ ಮೇರೆಗೆ ಕಲ್ಪಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಜನಸ್ಪಂದನ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಿಲ್ಲ. ಜನರ ಅಹವಾಲುಗಳಿಗೆ ಸಕಾರಾತ್ಮಕ ಪರಿಹಾರ ದೊರಕಿಸುವ ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ವಿವಿಧ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಸಾರ್ವಜನಿಕ ಕುಂದು ಕೊರತೆಗಳನ್ನು ಕೂಡ ಪರಿಗಣಿಸಿ ಬಗೆಹರಿಸಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.