ಬೆಂಗಳೂರು: ವೈಎಸ್ವಿ ದತ್ತಾಗೆ ಕಡೂರು ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಗುರುವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿತ್ತು. ಈ ಪಟ್ಟಿಯಲ್ಲಿ 42 ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿತ್ತು. ಕಾಂಗ್ರೆಸ್ ಟಿಕೆಟ್ ಸಿಗುತ್ತೆ ಎಂದುಕೊಂಡೇ ಜೆಡಿಎಸ್ನಿಂದ ಕಾಂಗ್ರೆಸ್ಗೆ ಬಂದಿದ್ದ ವೈಎಸ್ವಿ ದತ್ತಾ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ದತ್ತಾ ಅವರು ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರವನ್ನು ಬರೆದಿದ್ದಾರೆ. ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ. ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ದತ್ತಣ್ಣ, ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆದಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ನಿಮ್ಮ ಜೊತೆಗೆ ನಾನಿರಬೇಕು ಹಾಗೂ ನನ್ನ ಜೊತೆಗೆ ನೀವಿರಬೇಕು ಎಂಬುದು ಅನಿವಾರ್ಯವಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ. ಮುಂದಿನ ರಾಜಕೀಯ ನಿಲುವುಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಏಪ್ರಿಲ್ 9 ರಂದು ಅಭಿಮಾನಿಗಳ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಭಿಮಾನಿಗಳ ಅಭಿಪ್ರಾಯದಂತೆ ಅವರು ತಮ್ಮ ಮುಂದಿನ ರಾಜಕೀಯ ಹೆಜ್ಜೆಯನ್ನು ಇಡುವ ಸಾಧ್ಯತೆ ದಟ್ಟವಾಗಿದೆ.