ತಮಿಳುನಾಡಿಗೆ ನೀರು: ಕಾವೇರಿ ನದಿ ತೀರದಲ್ಲಿ‌ ಮಕ್ಕಳಿಂದ ಪ್ರತಿಭಟನೆ

Advertisement

ಶ್ರೀರಂಗಪಟ್ಟಣ: ತಮಿಳುನಾಡಿಗೆ ಹರಿಸಲಾಗುತ್ತಿರುವ ಕಾವೇರಿ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿ ಕಾವೇರಿ ನದಿ ತೀರದಲ್ಲಿ ಚಿಕ್ಕ ಚಿಕ್ಕ ಮಕ್ಕಳು ಪ್ರತಿಭಟನೆ ನಡೆಸಿದರು.

ಭೂಮಿತಾಯಿ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಹಾಗೂ ಸಮಿತಿ‌ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣ ಸ್ನಾನಘಟ್ಟ ಬಳಿಯ ಕಾವೇರಿ ನದಿ ತೀರದಲ್ಲಿ ರೈತರು ಹಾಗೂ ಮಕ್ಕಳು ಪ್ರತಿಭಟಿಸಿದರು.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದು, ಅಣೆಕಟ್ಟೆಯಲ್ಲಿ ನೀರು ಭರ್ತಿಯಾಗಿಲ್ಲ. ಈಗಾಗಲೇ ಬೆಳೆದಿರುವ ಬೆಳೆಗಳಿಗೆ ನೀರು ಪೂರೈಸಲಾಗುತ್ತಿಲ್ಲ. ಜೊತೆಗೆ ಕುಡಿಯುವ ನೀರಿಗೂ ಆಹಾಕಾರ ಶುರುವಾಗಲಿದ್ದು, ಸರ್ಕಾರ ಮೊದಲು ನಮ್ಮ ರಾಜ್ಯದ ಹಿತ ಕಾಪಾಡಬೇಕು.

ಕಾವೇರಿ ನೀರು ಕುಡಿಯುತ್ತಿರುವ ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಪ್ರತಿಯೊಬ್ಬರೂ ಬೀದಿಗಳಿದು ನೀರನ್ನು ರಕ್ಷಿಸಿಕೊಳ್ಳಬೇಕೆಂದು ಮಕ್ಕಳು ದೊಡ್ಡವರಿಗೆ ಕಿವಿ ಮಾತು ಹೇಳಿದರು.

ಬಳಿಕ ತಾಲ್ಲೂಕು ಕಚೇರಿ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರದ ನಡೆಯನ್ನು ಖಂಡಿಸಿದರು. ವಿವಿಧ ಗ್ರಾಮಗಳ ನೂರಾರು ರೈತರು ಹಾಗೂ ಮಕ್ಕಳು ಭಾಗವಹಿಸಿದ್ದರು.