ನಾಯಕತ್ವದ ಕೊರತೆ, ಆಂತರಿಕ ಕಚ್ಚಾಟದಿಂದ ಸೊರಗಿದ ಕಾಂಗ್ರೆಸ್

Advertisement

ಬ್ಯಾಡಗಿ: ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಉತ್ತಮ ನಾಯಕತ್ವದ ಕೊರತೆ ಹಾಗೂ ಆಂತರಿಕ ಕಚ್ಚಾಟಗಳಿಂದ ಕಾಂಗ್ರೆಸ್ ತನ್ನ ನೆಲೆಯನ್ನು ಕಳೆದುಕೊಂಡಿದೆ. ಇಂತಹ ಪಕ್ಷಕ್ಕೆ ತಾವು ಸೇರುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸ್ಪಷ್ಟಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ತವರು ಜಿಲ್ಲೆಯಲ್ಲಿಯೇ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ವಿಚಾರವಾಗಿ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ಪೂರ್ವಾಗ್ರಹ ಪೀಡಿತ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದ ರಾಜ್ಯದಲ್ಲಿ ಮತ್ತೆ ಅಧಿಕಾರ ಪಡೆಯುವ ಹಗಲುಗನಸು ಕಾಣುತ್ತಿರುವ ಕಾಂಗ್ರೆಸ್ ನಾಯಕರು ನೈತಿಕತೆಯನ್ನು ಮರೆತಿದ್ದಾರೆ ಎಂದು ಟೀಕಿಸಿದರು.
ಹಾವೇರಿ ಜಿಲ್ಲೆಯ ಬಿಜೆಪಿ ಶಾಸಕರಿಬ್ಬರೂ ಕಾಂಗ್ರೆಸ್ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಖಾಸಗಿ ಟಿವಿ ವಾಹಿನಿಯಲ್ಲಿ ಸುಳ್ಳು ಹೇಳಿಕೆ ನೀಡಿರುವುದು ಅವರ ಹತಾಶೆಯ ಮನೋಭಾವವನ್ನು ಎತ್ತಿ ತೋರಿಸುತ್ತಿದೆ. ಇತ್ತೀಚೆಗೆ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿಧ್ವನಿ ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿ ಭ್ರಮ ನಿರಸನಗೊಂಡು ಈ ತರಹದ ಸುಳ್ಳು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದರು.