ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ: ಸಿಎಂ ಬಸವರಾಜ ಬೊಮ್ಮಾಯಿ

ನೇಕಾರರ ಸಮಸ್ಯ
Advertisement

ಬೆಂಗಳೂರು : ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್ ನೀಡಲು
ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು 48 ಜಿಎಸ್ ಟಿ ಕೌನ್ಸಿಲ್ ಸಭೇಯಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ವೃತ್ತಿಪರ ನೇಕಾರರಿಗೆ ನೀಡುವ ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳ :
ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ವೃತ್ತಿಪರ ನೇಕಾರರ ಕೈಮಗ್ಗಕ್ಕೆ ಕೈಗಾರಿಕಾ ಇಲಾಖೆಯಿಂದ ಶೇ. 30 ರಷ್ಟು ಸಹಾಯಧನ ನೀಡಲಾಗುತ್ತಿದ್ದು, ಅದನ್ನು ಶೇ. 50 ರಷ್ಟು ಹೆಚ್ಚಿಸುವ ಬೇಡಿಕೆಯನ್ನು ಒಪ್ಪಲಾಗಿದೆ. ನೇಕಾರ ಸಮ್ಮಾನ ಯೋಜನೆಯಡಿ 46000 ಕೈಮಗ್ಗ ನೇಕಾರರಿಗೆ 5000 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ತೀರ್ಮಾನಿಸಲಾಗಿದೆ. ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ “ಗುಡಿ ಕೈಗಾರಿಕೆ”ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದರು.
ಕೈಮಗ್ಗ ನಿಗಮದ ಮೂಲಕ ಸಮವಸ್ತ್ರ ಪೂರೈಕೆ :
ಸರ್ಕಾರದ ನೇಕಾರ (ಕೈಮಗ್ಗ ಮತ್ತು ವಿದ್ಯುತ್ ಚಾಲಿತ) ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಯಿತು. ಇದನ್ನು ಡಿಸೆಂಬರ್ ತಿಂಗಳಿನಲ್ಲಿಯೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ. 25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನಿಸಲಾಯಿತು ಎಂದರು.
ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ :
ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಯಿತು. 5 ಎಚ್‍.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ ಒದಗಿಸಲ ಹಾಗೂ ನಿಗದಿತ ದರದಲ್ಲಿ ಶೇ. 50 ರಿಯಾಯಿತಿ ನೀಡಲು ತೀರ್ಮಾನಿಸಲಾಯಿತು ಎಂದರು.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ವೃತ್ತಿಪರ ಕೂಲಿ ನೇಕಾರರು, ಕೃಷಿ ಕಾರ್ಮಿಕರು , ಹೀಗೆ ವಿವಿಧ ಅಸಂಘಟಿತ ಕಾರ್ಮಿಕರ ಒಂದು ಮಂಡಳಿ ರಚಿಸಿ, ಅವರಿಗೂ ವಿವಿಧ ಸೌಲಭ್ಯಗಳನ್ನು ನೀಡುವ ಬೇಡಿಕೆ ಇದ್ದು, ಮುಂದಿನ ಆಯವ್ಯಯದ ಮಂಡನೆಯ ಸಂದರ್ಭದಲ್ಲಿ ತೀರ್ಮಾನಿಸಲಾಗುವುದು.
ಡಿಸೆಂಬರ್ ಅಂತ್ಯದೊಳಗೆ ನೇಕಾರರ ಮಕ್ಕಳಿಗೆ ವಿದ್ಯಾನಿಧಿ :
ನೇಕಾರರ ಮಕ್ಕಳಿಗೆ ವಿದ್ಯಾನಿಧಿಯನ್ನು ಡಿಸೆಂಬರ್ ಅಂತ್ಯದೊಳಗೆ ಬಿಡುಗಡೆ ಮಾಡಲಾಗುವುದು. ಇದಕ್ಕೆ ಪೂರಕ ಮಾಹಿತಿಗಳನ್ನು ಸಂಗ್ರಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಡೀ ನೇಕಾರಿಕೆಯ ವೃತ್ತಿಯಲ್ಲಿ ಸಂಶೋಧನೆಗಳಾಗಿವೆ. ಈಗಾಗಲೇ ಸಿಎನ್ ಸಿ ಮಗ್ಗಗಳಿವೆ. ಅವುಗಳನ್ನು ಗುಣಮಟ್ಟದ ಉತ್ಪಾದನೆ ಹಾಗೂ ಉತ್ಪಾದಕತೆ ಹೆಚ್ಚಾಗಬೇಕಿದೆ. ಮುಂದಿನ ಆಯವ್ಯಯಲ್ಲಿ ಈ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದರು.