ಪಂಜಾಬ್-ಆರ್‌ಸಿಬಿ ಹೋರಾಟ ಇಂದು

Advertisement

ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ೨೭ ನೇ ಪಂದ್ಯ ಗುರುವಾರ ಇಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ.
ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್‌ದ ಐ.ಎಸ್.ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯ ಉಭಯ ತಂಡಗಳಿಗೆ ಆರನೇ ಲೀಗ್ ಪಂದ್ಯವಾಗಿದೆ.
ಶಿಖರ್ ಧವನ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ, ಈ ವರೆಗೆ ಐದು ಲೀಗ್ ಪಂದ್ಯಗಳನ್ನು ಆಡಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಜಯ ಹಾಗೂ ಎರಡು ಪಂದ್ಯಗಳಲ್ಲಿ ಸೋಲಿನ ಕಹಿ ಅನುಭವಿಸಿ ಒಟ್ಟು ಆರು ಅಂಕಗಳೊಂದಿಗೆ ಸಧ್ಯ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈ ವರೆಗೆ ಆಡಿರುವ ಐದು ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಜಯ ಹಾಗೂ ಮೂರು ಪಂದ್ಯಗಳಲ್ಲಿ ಸೋಲಿನ ಕಹಿ ಅನುಭವಿಸಿ ಒಟ್ಟು ನಾಲ್ಕು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಸಧ್ಯ ಎಂಟನೇ ಸ್ಥಾನದಲ್ಲಿದೆ.
ಪಂಜಾಬ್ ತಂಡದ ನಾಯಕ, ಹಿರಿಯ ಕ್ರಿಕೆಟಿಗ ಶಿಖರ್ ಧವನ್ ಗಾಯದ ಸಮಸ್ಯೆ ಎದುರಿಸುತ್ತಿರುವುದು ತಂಡದ ಆಡಳಿತವನ್ನು ಚಿಂತೆಗೀಡು ಮಾಡಿದೆ. ಗಾಯದ ಸಮಸ್ಯೆಯಿಂದಾಗಿ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಪಂದ್ಯದಲ್ಲಿ ಶಿಖರ್ ಧವನ್ ಆಡಿರಲಿಲ್ಲ. ಆ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಸ್ಯಾಮ್ ಕರನ್ ಮುನ್ನಡೆಸಿದ್ದರು. ಕೊಲ್ಕತಾ ನೈಟ್ ರೈಡರ್ಸ್ ತಂಡದ ವಿರುದ್ಧ ತನ್ನ ಮೊದಲ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಶುಭಾರಂಭಗೈದ ಪಂಜಾಬ್ ಕಿಂಗ್ಸ್, ನಂತರ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಿದ್ದ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸಿತು.
ಆದರೆ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ವಿರುದ್ಧ ಆಡಿದ ತನ್ನ ಮೂರನೇ ಪಂದ್ಯದಲ್ಲಿ ಪಂಜಾಬ್ ತಂಡ ಸೋಲಿನ ಕಹಿ ಅನುಭವಿಸಿತು. ನಂತರ ಗುಜರಾತ್ ಟೈಟಾನ್ಸ್ ತಂಡದ ವಿರುದ್ಧ ಆಡಿದ ಪಂದ್ಯದಲ್ಲೂ ಸೋಲಿನ ಕಹಿ ಅನುಭವಿಸಿದ ಪಂಜಾಬ್, ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆಡಿದ ಪಂದ್ಯದಲ್ಲಿ ಮತ್ತೆ ಗೆಲುವಿನ ಹಳಿಗೆ ಬಂದಿತು. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಆಡುವುದು ಅನುಮಾನ. ಒಂದು ವೇಳೆ ಧವನ್ ಆಡಲು ಅರ್ಹರಾಗದಿದ್ದಲ್ಲಿ ಪಂದ್ಯ ಸ್ಯಾಮ್ ಕರನ್ ತಂಡವನ್ನು ಮುನ್ನಡೆಸುವುದು ಖಚಿತ.
ಅಥರ್ವ ಟೈಡೆ, ಮ್ಯಾಥ್ಯೂ ಶಾರ್ಟ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ಸಿಕಂದರ್ ರಜಾ, ಸ್ಯಾಮ್ ಕರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಷದೀಪ್‌ಸಿಂಗ್‌ಗವರನ್ನು ಒಳಗೊಂಡ ಪಂಜಾಬ್ ತಂಡದ ಬ್ಯಾಟಿಂಗ್ ಹಾಗು ಬೌಲಿಂಗ್ ವಿಭಾಗಳೆರಡೂ ಬಲಿಷ್ಠವಾಗಿದೆ.
ಫಾಫ್ ಡು ಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಆಡಿದ ತನ್ನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಶುಭಾರಂಭಗೈದಿತು. ನಂತರ ಕೊಲ್ಕತಾ ನೈಟ್ ರೈಡರ್ಸ್ ವಿರುದ್ಧ ಆಡಿದ ಎರಡನೇ ಪಂದ್ಯದಲ್ಲಿ ಸೋಲಿನ ಕಹಿ ಅನುಭವಿಸಿದ ಆರ್‌ಸಿಬಿ, ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಪರಾಜಯ ಹೊಂದಿತು. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿತಾದರೂ ಅದೇ ಮೈದಾನದಲ್ಲಿ ಚೆನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಆಡಿದ ಪಂದ್ಯದಲ್ಲಿ ಹೋರಾಡಿ ಸೋಲಿನ ಕಹಿ ಅನುಭವಿಸಿತು.
ನಾಯಕ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೇನ್ ಮ್ಯಾಕ್ಸವೆಲ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಡೇವಿಡ್ ವಿಲ್ಲಿ ಅವರನ್ನೊಳಗೊಂಡ ಆರ್‌ಸಿಬಿ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಭಾಗಗಳೆರಡರಲ್ಲೂ ಬಲಿಷ್ಠವಾಗಿದೆ.

ಪಂದ್ಯದ ಆರಂಭ: ಮಧ್ಯಾಹ್ನ ೩-೩೦ ರಿಂದ