ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್

Advertisement

ದಾವಣಗೆರೆ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಗಂಭೀರವಾಗಿ ಪರಿಶೀಲಿಸಿ ಬಜೆಟ್‌ನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ೩೮ನೇ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪತ್ರಕರ್ತರ ಜತೆ ನಾವಿರುತ್ತೇವೆ. ನಾವು ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದನ್ನು ಬರೆಯಿರಿ, ಕೆಟ್ಟದ್ದನ್ನು ಮಾಡಿದರೆ ಕೆಟ್ಟದ್ದು ಬರೆಯಿರಿ. ಒಳ್ಳೆಯದನ್ನು ಕೆಟ್ಟದ್ದೆಂದು ಬಿಂಬಿಸಬಾರದು ಎಂದು ಸಲಹೆ ನೀಡಿದರು.

ಮೌಢ್ಯ, ಕಂದಾಚಾರ, ಕರ್ಮ ಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು. ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ಇರುವ ಈ ಯೋಜನೆಯನ್ನು ಬಿಟ್ಟಿ ಗ್ಯಾರಂಟಿ ಎಂದು ಕರೆಯದೆ, ನೀವೇ ಪರಿಶೀಲಿಸಿ ಬರೆಯಿರಿ. ಏನನ್ನಾದರೂ ಪ್ರಕಟಿಸುವ ಮೊದಲು ಪರಿಶೀಲನೆ ನಡೆಸಿ ಎಂದು ಕಿವಿಮಾತು ಹೇಳಿದರು.

ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳವಣಿಗೆಗೆ ಅಡ್ಡಿ ಆಗಿರುವ ಪಟ್ಟಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಕೋದ್ಯಮ ಸಾಧ್ಯ ಎಂದರು.

ಉಳ್ಳವರ ಕೈಯಲ್ಲಿ ಪತ್ರಿಕೋದ್ಯಮ ಸಿಲುಕಿದೆ. ಹೀಗಾಗಿ ಶ್ರೀಮಂತರ ಹಿತಾಸಕ್ತಿ ಕಾಯುವ, ಬಡವರ ಹಿತಾಕ್ತಿಗೆ ವಿರುದ್ಧವಾಗಿ ಬರೆಯುವ ಅಪಾಯ ಇರುತ್ತದೆ. ಇದನ್ನು ಪರಿಶೀಲಿಸಿಕೊಳ್ಳಿ. ನಾನು ಅಭಿವ್ಯಕ್ತಿ ಸ್ವಾತಂತ್ರ‍್ಯದ ಪರವಾಗಿ ಇರುವವನು, ಬೆಂಬಲಿಸುವವನು. ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಘನತೆ ತರುವಂತೆ ಮಾಡಬೇಕು ಎಂದರು.

ಸ್ವಾತಂತ್ರ‍್ಯಾಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ‍್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ‍್ಯಾನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು.

ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ, ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದು ಹೇಳಿದರು.

ಪತ್ರಿಕಾ ವೃತ್ತಿ ಸಮಾಜದ ಅಸಮಾನತೆ ಹೋಗಲಾಡಿಸಲು, ಅವಕಾಶ ವಂಚಿತರ ಪರವಾಗಿ, ಮೀಸಲಾತಿಯ ಆಶಯಗಳ ಪರವಾಗಿ ಇರಬೇಕು. ಇದರಿಂದ ಸಾಮಾಜಿಕ ನ್ಯಾಯಯನ್ನು ಧ್ವನಿ ಇಲ್ಲದವರಿಗೆ ಕೊಡಲು ಸಾಧ್ಯ. ಹೀಗಾದಾಗ ಬಸವಣ್ಣನವರ ಸಮ ಸಮಾಜದ ಆಶಯ ಈಡೇರಲು ಸಾಧ್ಯ. ಪತ್ರಕರ್ತರು ಇದಕ್ಕೆ ಪೂರಕವಾಗಿ ವಸ್ತುನಿಷ್ಠವಾಗಿ ಕೆಲಸ ಮಾಡಬೇಕು ಎಂದರು.

ಸಮ್ಮೇಳನದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು.ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಬಸವಂತಪ್ಪ, ಡಿ.ಜಿ.ಶಾಂತನಗೌಡ, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ.ವಿನಯ್‌ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಇದ್ದರು.