ಬಿಜೆಪಿ ವಿಧಾನಸಭಾ ಚುನಾವಣೆಗೆ ಸನ್ನದ್ಧವಾಗಿದೆ: ಕೇಂದ್ರ ಸಚಿವ ಜೋಶಿ

ಪ್ರಲ್ಹಾದ ಜೋಶಿ
Advertisement

ಧಾರವಾಡ: ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಸನ್ನದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಐಐಟಿ ಘಟಿಕೋತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆಯ ಸಿದ್ಧತೆಯಲ್ಲಿ ನಮ್ಮ ಪಕ್ಷ ಹಿಂದೆ ಬಿದ್ದಿಲ್ಲ. ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾದರೂ ನಮ್ಮ ಪಕ್ಷ ಎದುರಿಸಲು ಸಿದ್ಧವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಚುನಾವಣಾ ಸಿದ್ಧತೆ ನಡೆದಿದೆ ಎಂದರು.
ಕಾಂಗ್ರೆಸ್‌ನವರು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ. ಹಿಂದಿನ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಹೀನಾಯವಾಗಿ ಸೋಲಿಸಿದ್ದಾರೆ ಎಂದರು.
ಪಕ್ಷದ ಸ್ಥಾನಮಾನದಲ್ಲಿ ಬದಲಾವಣೆ ಮಾಡಲಾಗಿದೆ. ಇದಕ್ಕೆ ಅಸಮಾಧಾನ ಕಾರಣವಲ್ಲ. ಅದು ನಿರಂತರ ಪ್ರಕ್ರಿಯೆ. ಚುನಾವಣಾ ಸಿದ್ಧತೆ ಕಾರಣಕ್ಕಾಗಿ ಸ್ಥಾನಗಳಲ್ಲಿ ಬದಲಾವಣೆ ನಡೆಯುತ್ತಿರುತ್ತದೆ ಎಂದು ತಿಳಿಸಿದರು.