ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ

Advertisement

ಬೆಳಗಾವಿ: ವಿಧಾನಸಭೆ ಚುನಾವಣೆ ‌ಸೋಲನ್ನು ಮರೆತು ಎಲ್ಲ ನಾಯಕರು ಒಂದಾಗಿ ದೇಶದಲ್ಲಿ ‌ಪ್ರಧಾನಿ ನರೇಂದ್ರ ‌ಮೋದಿ ಅವರನ್ನು ‌ಇನ್ನೊಂದು ಅವಧಿಗೆ ಪ್ರಧಾನಿ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ನಗರ ಮತ್ತು ಗ್ರಾಮಾಂತರ ಜಿಲ್ಲಾ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ತರಲು ಎಲ್ಲ ನಾಯಕರು,‌ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡೋಣ ಎಂದರು.
ಲೋಕಸಭೆ, ವಿಧಾನಸಭೆ ಚುನಾವಣೆಗಳು ಬೇರೆ ಬೇರೆ ಆಗಿವೆ. ಮತ್ತೆ ಮೋದಿಯವರನ್ನು ಪ್ರಧಾನಿ‌ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು. ನರೇಂದ್ರ ಮೋದಿ ಬಂದ ಮೇಲೆ ಸ್ವಚ್ಛ, ದಕ್ಷ ಆಡಳಿತ ನೀಡಿದ್ದಾರೆ. ದೇಶದಲ್ಲಿ 12 ಕೋಟಿ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಪ್ರತಿ ಮನೆಗೆ ನೀರು ಕೊಡುವ ಬಗ್ಗೆ ಪ್ರಧಾನಿ ಹೇಳಿದ್ದರು. 40 ಲಕ್ಷ ಮನೆಗಳಿಗೆ ರಾಜ್ಯದಲ್ಲಿ ನೀರು ಕೊಡಲಾಗಿದೆ‌. ರೈತರು, ವಿದ್ಯಾರ್ಥಿಗಳಿಗೆ ಹಲವು ಕಾರ್ಯ ಮಾಡಿದೇವೆ‌. ದೇಶ ನರೇಂದ್ರ ಮೋದಿ ಆಡಳಿತದಲ್ಲಿ ಸುರಕ್ಷಿತವಾಗಿದೆ. ಪಾಕಿಸ್ತಾನದ ಸೊಕ್ಕು ಅಡಗಿಸಿದ್ದು ಪ್ರಧಾನಿ ನರೇಂದ್ರ ಮೋದಿ ಎಂದರು.
ಪಟ್ನಾದಲ್ಲಿ ನಡೆದ ತೃತೀಯ ರಂಗದ ನಾಯಕರ ಸಭೆಯಲ್ಲಿ ದೇಶದ ಉದ್ಧಾರ ಬಗ್ಗೆ ಚರ್ಚೆ ಆಗಿಲ್ಲ, ನರೇಂದ್ರ ಮೋದಿಯನ್ನು ಹೇಗೆ ಸೋಲಿಸಬೇಕು. ರಾಹುಲ್ ಗಾಂಧಿಗೆ ಮದುವೆ ಮಾಡುವ ಬಗ್ಗೆ ಚರ್ಚೆ ಆಗಿದೆ. ಮೋದಿ ಸೋಲಲ್ಲ, ರಾಹುಲ್ ಗಾಂಧಿ ಮದುವೆ ಆಗಲ್ಲ ಎಂದು ಬೊಮ್ಮಾಯಿ ವ್ಯಂಗ್ಯವಾಡಿದರು.
ಮೋದಿ ಎದುರಿಸಲು ವಿರೋಧ ಪಕ್ಷದಲ್ಲಿ ಒಬ್ಬ ನಾಯಕ ಇಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 25 ಸ್ಥಾನಗಳನ್ನು ಮತ್ತೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.