ರೈತರ ದಿಡೀರ್ ಪ್ರತಿಭಟನೆ: ವಾಹನ ಸಂಚಾರ ಅಸ್ತವ್ಯಸ್ತ

Advertisement

ಮಂಡ್ಯ: ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಮಂಡ್ಯದಲ್ಲಿ ರಸ್ತೆ ತಡೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟಿಸಿದರು.
ರೈತರ ದಿಡೀರ್ ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತ ಉಂಟಾಯಿತು, ಸರ್ಕಾರಿ ಬಸ್ ಗಳು ಮುಂದೆ ಸಂಚರಿಸಲು ಮುಂದಾದಾಗ ಪ್ರತಿಭಟನಾಕಾರರು ಬಸ್ ಮುಂದೆ ಕುಳಿತು ಅಡ್ಡಿಪಡಿಸಿದರು.

ಕಾವೇರಿ ಕೊಳ್ಳದ ರೈತರ ಹಿತ ಬದಿಗೊತ್ತಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ರೈತ ದ್ರೋಹಿ ಯಾಗಿದೆ ಎಂದು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು
ಕೇಂದ್ರ ಸರ್ಕಾರ ಸಂಕಷ್ಟಕಾಲದಲ್ಲಿ ಮಧ್ಯಪ್ರವೇಶಿಸಬೇಕಾಗಿತ್ತು,ಆದರೆ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು. ಆಗಸ್ಟ್ ತಿಂಗಳಿನಲ್ಲಿ 13 ಟಿಎಂಸಿ ನೀರು ಹರಿಸಿರುವ ಸರ್ಕಾರ ಇದೀಗ ಮತ್ತೆ ನೀರು ಬಿಟ್ಟಿದೆ, ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ನೂರು ಅಡಿಗೆ ಕುಸಿದಿದೆ. ಇಲ್ಲಿನ ಬೆಳೆದು ನಿಂತಿರುವ ಬೆಳೆಗೆ ನೀರು ಕೊಡುತ್ತಿಲ್ಲ. ಹೊಸ ಬೆಳೆ ನಾಟಿ ಮಾಡಲು ಸಾಧ್ಯವಾಗಿಲ್ಲ, ಇದೇ ರೀತಿ ನೀರು ಹರಿಸುತ್ತಿದ್ದರೆ ಕುಡಿಯಲು ನೀರು ಸಹ ಇಲ್ಲದಂತಾಗುತ್ತದೆ, ಈ ತಕ್ಷಣ ನೀರು ನಿಲ್ಲಿಸುವಂತೆ ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಮತ್ತಷ್ಟು ದಿನ ಮುಂದೂಡುವುದು. ತಮಿಳುನಾಡಿಗೆ ಹೆಚ್ಚಿನ ನೀರು ಹರಿಯಲಿ ಎಂಬ ಹುನ್ನಾರವಾಗಿದೆ. ರಾಜ್ಯದ ಜಲಾಶಯಗಳ ವಾಸ್ತವ ಪರಿಸ್ಥಿತಿ ಅರಿಯಲು ನೀರಾವರಿ ತಜ್ಞರ ತಂಡ ಕಳುಹಿಸಿಕೊಡಬೇಕು, ಜಲಾಶಯದಲ್ಲಿರುವ ನೀರಿನ ಲಭ್ಯತೆ ಬಗ್ಗೆ ತಿಳಿದುಕೊಳ್ಳಲಿ,ಅದನ್ನು ಬಿಟ್ಟು ನೀರು ಹರಿಸಲು ಪದೇ ಪದೇ ಆದೇಶ ಮಾಡುವುದು ಮಲತಾಯಿ ಧೋರಣೆ ಅಲ್ಲವೇ ಎಂದು ಪ್ರಶ್ನಿಸಿದ ಪ್ರತಿಭಟನಾ ನಿರತ ರೈತರು ರಾಜ್ಯ ಸರ್ಕಾರ ಯಾವುದಕ್ಕೂ ಮಣಿಯದೆ ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು. ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ರೈತರು ಎಚ್ಚರಿಸಿದರು. ರೈತ ಸಂಘದ ಮರಿ ಚೆನ್ನಪ್ಪ, ವಿಜಯ್ ಕುಮಾರ್, ಬಿದರಕೋಟೆ ರಮೇಶ್, ಇಂಡು ವಾಳು ಸಿದ್ದೇಗೌಡ,ಅಣ್ಣೂರು ಮಹೇಂದ್ರ, ರಾಮಕೃಷ್ಣೇಗೌಡ, ಜವರೇಗೌಡ ನೇತೃತ್ವ ವಹಿಸಿದ್ದರು.