ಲೋಕ ಸಮರದ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ

Advertisement

ಹುಬ್ಬಳ್ಳಿ: ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ರಾಜಕಾರಣದಲ್ಲಿ ಪರಿಣಾಮಕಾರಿ ಬದಲಾವಣೆ ಆಗಲಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಸೂಚನೆಯನ್ನು ಶಾಸಕ ಮಹೇಶ ಟೆಂಗಿನಕಾಯಿ ನೀಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಅನ್ಯಾಯವಾಗುತ್ತಿಲ್ಲ. ಬದಲಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ನ 224 ಶಾಸಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಭರಾಟೆಯಲ್ಲಿ ಶಾಸಕರಿಗೆ ಬಿಡಿಗಾಸು ಅನುದಾನ ನೀಡದೇ ಅನ್ಯಾಯ ಎಸಗಿದೆ. ಈ ಬಗ್ಗೆ ಮುಖ್ಯ ಮಂತ್ರಿಗಳಿಗೂ ಪಶ್ಚಾತಾಪವಾಗಿದ್ದು, ಅವರ ಆಪ್ತರ ಮೂಲಕ, ಲೋಕಸಭೆ ಚುನಾವಣೆಯ ಬಳಿಕ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಹೇಳಿಸುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರಿಗೆ ಕಳೆದ 8 ತಿಂಗಳುಗಳಿಂದ ನಯಾ ಪೈಸೆ ಅನುದಾನ ಬಂದಿಲ್ಲ. ಹೀಗಾಗಿ ರಾಜ್ಯದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿಗಳು ಆರ್ಥಿಕ ದಿವಾಳಿ ತೆಗೆಯುವ ಯೋಜನೆಗಳು. ಬಿಜೆಪಿ ಅಧಿಕಾರದಲ್ಲಿದ್ದಾಗ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗುತ್ತಿದ್ದವು ಎಂದು ಸ್ವತಃ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ ಎಂದರು‌.

ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ ಅವರನ್ನು ಬಿಜೆಪಿ ಕಾರ್ಯಕರ್ತರು ಒಪ್ಪಿಕೊಂಡಿದ್ದಾರೆ. ಬಿಜೆಪಿ ಪಾಳಯದಲ್ಲಿ ಕೆಲ ಊಹಾಪೋಹಗಳನ್ನು ಹರಿಬಿಡಲಾಗಿದೆ. ಶೆಟ್ಟರ ಆಗಮನದಿಂದ ಪಕ್ಷಕ್ಕೆ ಬಲ ಬಂದಿದೆ. ಸಣ್ಣ ಪುಟ್ಟ ಸಮಸ್ಯೆ, ಬಿರುಕುಗಳನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲಾಗುವುದು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವತ್ತ ಪಕ್ಷ ಸಂಘಟಿಸಲಾಗುವುದು ಎಂದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಧಾರವಾಡ ಸಂಸದರಾಗಿ ಕಳೆದ ನಾಲಕ್ಕು ಅವಧಿಯಿಂದ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ನಿಸ್ಸಂದೇಹವಾಗಿ ಈ ಬಾರಿಯೂ ಅವರೇ ಧಾರವಾಡ ಲೋಕಸಭೆಗೆ ಬಿಜೆಪಿ ಅಭ್ಯರ್ಥಿ ಎಂದರು.