ಶ್ರೀರಂಗಪಟ್ಟಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ

Advertisement

ಶ್ರೀರಂಗಪಟ್ಟಣ: ಹೆಚ್.ಐ.ವಿ ಏಡ್ಸ್ ಕಾಯಿಲೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿದರೆ ದೇಶದ ಭವಿಷ್ಯ ಹಾಗೂ ಭದ್ರತೆಗೆ ಪೂರಕವಾಗಲಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ದೇವರಾಜ್ ವೈ ಹೆಚ್ ತಿಳಿಸಿದರು.
ಶ್ರೀರಂಗಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಶ್ರೀರಂಗಪಟ್ಟಣ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ವಿಶ್ವ ಏಡ್ಸ್ ದಿನಾಚರಣೆ” ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹೆಚ್ಐವಿ ಏಡ್ಸ ನಿಯಂತ್ರಣ ಕಾಯ್ದೆ 2017ರ ಪ್ರಕಾರ ಹೆಚ್ಐವಿ ಪೀಡಿತರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಖಾಸಗಿ ಕ್ಷೇತ್ರಗಳಲ್ಲಾಗಲೀ ಯಾವುದೇ ತಾರತಮ್ಯ ಮಾಡುವುದು ಅಪರಾಧ. ಸೋಂಕಿತರ ತಾರತಮ್ಯ ನಿಲ್ಲಿಸಿ, ಬದುಕಲು ಬಿಡಬೇಕು. ಹಾಗೂ ತನ್ಮೂಲಕ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸಬೇಕೆಂದು ಅವರು ಸಲಹೆ ನೀಡಿದರು. ನಂತರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ್ ಮಾತನಾಡಿ, ವಿಶ್ವ ಏಡ್ಸ್ ದಿನಾಚರಣೆ ಉದ್ದೇಶ ಹೆಚ್ಐವಿ ಏಡ್ಸ್ ಹರಡುವಿಕೆ , ಲಕ್ಷಣಗಳು ಪತ್ತೆ ಹಚ್ಚುವಿಕೆ ಕುರಿತು ಉಪನ್ಯಾಸ ನೀಡಿದರು. ನಂತರ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ ಮಾತನಾಡಿ, ಹೆಚ್ಐವಿ ಏಡ್ಸ್ ಬಗ್ಗೆ ಅರಿತುಕೊಂಡು 2030 ರ ವೇಳೆಗೆ ಹೆಚ್ಐವಿ ಮುಕ್ತ ಕರ್ನಾಟಕ ಮಾಡಲು ಎಲ್ಲರೂ ಒಂದುಗೂಡಿ ಶ್ರಮಿಸಬೇಕೆಂದು ಮನವಿ ಮಾಡಿದರು. ಆಪ್ತ ಸಮಾಲೋಚಿಕಿ ಎ.ಜಿ.ಮಿಲನ ಹೆಚ್ಐವಿ ಪರೀಕ್ಷೆ ಮತ್ತು ಆಪ್ತ ಸಮಾಲೋಚನಾ ಸೇವೆಗಳ ಕುರಿತು ಮಾಹಿತಿ ನೀಡಿದರು. ನಂತರ ವಿಶ್ವ ಏಡ್ಸ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ಮಂಜುಳಾ ಎಂ.ಕೆ, ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮೂರ್ತಿ.ಐ ಆರ್, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ ಮೋಹನ್, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ್, ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.