ಶ್ರೇಷ್ಠ ಭಾರತ ನಿರ್ಮಾಣಕ್ಕೆ ಕರೆ

Advertisement

ಬೆಳಗಾವಿ: ಭಾರತವು ಮುಂಬರುವ ದಿನಗಳಲ್ಲಿ ವಿಶ್ವ ಗುರು ಪಟ್ಟಕ್ಕೇರಲಿದ್ದು, ಇದಕ್ಕೆ ಪೂರಕವಾಗಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಯುವ ಜನತೆ ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು. ನಗರದ ಕೆ.ಎಲ್.ಇ ವಿಶ್ವ ವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದಲ್ಲಿ ಅವರು ಮಾತನಾಡಿದರು. ಹೊಸ ರಾಷ್ಟೀಯ ಶಿಕ್ಷಣ ನೀತಿ ಅನುಷ್ಠಾನದಿಂದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಮಹತ್ತರ ಬದಲಾವಣೆಗಳಾಗಿವೆ. ವಿದ್ಯಾಥರ್ಿಗಳು ಎನ್ಇಪಿ ಶಿಕ್ಷಣ ನೀತಿಗೆ ಹೊಂದಿಕೊಳ್ಳುತ್ತಿದ್ದಾರೆ. ಬರುವ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಎನ್ಇಪಿ ವಿದ್ಯಾರ್ಥಿಗಳಿಗೆ ಸಹಾಯವಾಗಲಿದೆ ಎಂದು ತಿಳಿಸಿದರು.
ಕೆ.ಎಲ್.ಇ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ದೇಶ, ವಿದೇಶಗಳಲ್ಲಿ ವೃತ್ತಿ ಜೀವನ ಆರಂಭಿಸಿ, ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿ ಪಡೆಯುವುದು ಮಾತ್ರವಲ್ಲದೇ, ಪದವಿಯ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.


ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿಧ್ಯಾರ್ಥಿಗಳು, ಯುವಕರ ಪಾತ್ರ ಬಹು ಮುಖ್ಯವಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಬಲಿಷ್ಠ ಭಾರತ ನಿರ್ಮಾಣಕ್ಕೆ ಯುವಕರು ಕೈ ಜೋಡಿಸಬೇಕು ಎಂದು ಅವರು ಸಲಹೆ ನೀಡಿದರು. ಮುಂಬರುವ 25 ವರ್ಷಗಳಲ್ಲಿ ಭಾರತ ಸ್ವಾತಂತ್ರ್ಯ ಪಡೆದು 100 ವರ್ಷ ಪೂರೈಸಲಿದೆ. ಮಹಾತ್ಮ ಗಾಂಧೀಜಿ ಅವರ ಕನಸಿನಂತೆ ಉತ್ತಮ ಸಮಾಜಕ್ಕೆ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕಿದೆ. ಅದೇ ರೀತಿಯಲ್ಲಿ ಪ್ರಕೃತಿ ಸಂರಕ್ಷಣೆ ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಕೆ.ಎಲ್.ಇ ಸಂಸ್ಥೆ ವಿವಿಧ ವೈದ್ಯಕೀಯ ಸೌಲಭ್ಯ ನೀಡುವುದರ ಮೂಲಕ ಕೆಳ ವರ್ಗದ ಜನರಿಗೆ ಸಾಕಷ್ಟು ಸಹಾಯ ಮಾಡುತ್ತಾ ಬಂದಿದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಕೆ.ಎಲ್.ಇ ಸಂಸ್ಥೆಯನ್ನು ಅನೇಕ ಬಾರಿ ಗುರುತಿಸಿ, ವಿವಿಧ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. ಕೆ.ಎಲ್.ಇ ಸಂಸ್ಥೆ ವಿಶ್ವದಲ್ಲೇ ಹೆಸರುವಾಸಿಯಾಗಿದೆ ಎಂದು ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆ.ಎಲ್.ಇ ವಿಶ್ವ ವಿದ್ಯಾಲಯದ ಕುಲಪತಿ ಡಾ. ಪ್ರಭಾಕರ ಕೋರೆ, ಕುಲಸಚಿವ ಪ್ರೊ. ನಿತೀನ್ ಗಂಗನೆ ಸೇರಿದಂತೆ ಕೆ.ಎಲ್.ಇ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಘಟ್ಟಿಕೋತ್ಸವದಲ್ಲಿ ಭಾಗವಹಿಸಿದ್ದರು.


ಇದಕ್ಕೂ ಮುಂಚೆ ಎಂ.ಎಸ್.ಸಿ, ಎಂಬಿಬಿಎಸ್, ಬಿಎಸ್ ಸಿ, ಬಿಡಿಎಸ್, ಎಂ ಫಾರ್ಮಾ, ಬಿಎಸ್ ಸಿ ನಸಿರ್ಂಗ್, ಬಿಪಿಟಿ, ಎಂಎಸ್ ಆಯುರ್ವೇದ ಬಿಎಎಂಎಸ್ ಸೇರಿದಂತೆ ವಿವಿಧ ಪದವಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು 23 ಚಿನ್ನದ ಪದಕ ಹಾಗೂ ಪದವಿ ಪ್ರಧಾನ ಮಾಡಿದರು.