ನವದೆಹಲಿ: ಮಂಡ್ಯದ ಸೀಟು ಹಂಚಿಕೆ ಇನ್ನೂ ಅಂತಿಮವಾಗಿಲ್ಲ ಎಂದು ಸುಮಲತಾ ಅಂಬರೀಶ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ನಾಯಕ ಜೆಪಿ ನಡ್ಡಾ ಅವರೊಂದಿಗಿನ ಮಾತುಕತೆ ಬಳಿಕ ಮಾತನಾಡಿರುವ ಅವರು, ಮಂಡ್ಯದ ಬಗ್ಗೆ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮಂಡ್ಯ ಕ್ಷೇತ್ರದಿಂದಲೇ ಟಿಕೆಟ್ ಕೊಡಲು ನಾನು ಕೇಳಿದ್ದೇನೆ. ಇಂದು ಸಂಜೆ ಸಭೆ ನಡೆಯಲಿದೆ. ಈ ಸಭೆಯ ನಂತರ ನಿರ್ಧಾರವಾಗಲಿದೆ ಎಂದರು.
ಮೋದಿಯವರು ನನಗೆ ಭರವಸೆ ನೀಡಿದ್ದಾರೆ. ನಿಮ್ಮನ್ನ ಮತ್ತು ನಿಮ್ಮ ಕಾರ್ಯಕರ್ತರನ್ನ ಯಾವುದೇ ಕಾರಣಕ್ಕೂ ಕೈಬಿಡುವ ಪ್ರಶ್ನೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ನನ್ನ ಮುಂದಿನ ನಿರ್ಧಾರವನ್ನ ಕ್ಷೇತ್ರಕ್ಕೆ ತೆರಳಿ ನಮ್ಮ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿಯಿಂದ ದೂರ ಹೋಗುವ ಪ್ರಶ್ನೆ ಇಲ್ಲ. ನನ್ನ ಸಂಸತ್ ಅವಧಿ ಮುಕ್ತಾಯದ ನಂತರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದರು.