ಹಣ ದ್ವಿಗುಣಗೊಳಿಸುವ ಆ್ಯಪ್‌ನಿಂದ 21 ಲಕ್ಷ ರೂ. ಕಳೆದುಕೊಂಡ ಮಹಿಳೆ ಆತ್ಮಹತ್ಯೆ

Advertisement

ಬಂಟ್ವಾಳ: ಮಹಿಳೆಯೊಬ್ಬರು ಬಂಟ್ವಾಳದ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅವರು ಹಣ ದ್ವಿಗುಣಗೊಳಿಸುವ ಆಪ್‌ನಲ್ಲಿ ೨೧ ಲಕ್ಷ ರೂ. ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಗೂ ದೂರು ನೀಡಿದ್ದರು.
ಕುಕ್ಕಿಪಾಡಿ ಗ್ರಾಮದ ಏರೋಡಿಯ ಜಾನ್ ಸಂತೋಷ್ ಡಿ’ಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜ (32) ಮೃತ ಮಹಿಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಕ್ಕಳು ಇಲ್ಲ ಎಂಬ ಕೊರಗು ಜೊತೆಗೆ ಆರ್ಥಿಕ ಸಂಕಷ್ಟದಿಂದ ಇವರು ಕೈಗೊಂಡ ದುಡುಕಿನ ನಿರ್ಧಾರದಿಂದ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ.
ವೀಟಾ ಅವರು ಶನಿವಾರ ರಾತ್ರಿ ೯ ಗಂಟೆಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಆ ಬಳಿಕ ವಿಷಯ ತಿಳಿದು ಸ್ಥಳೀಯರು ಹುಡುಕಾಟ ನಡೆಸಿದಾಗ ಫಲ್ಗುಣಿ ಸೇತುವೆಯಲ್ಲಿ ಇವರ ದ್ವಿಚಕ್ರ ವಾಹನ ಮಾತ್ರ ಪತ್ತೆಯಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ನದಿಯಲ್ಲಿ ಹುಡುಕಾಡಿದ್ದರು. ಬಹುಗ್ರಾಮ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಿಸಿರುವ ಅಣೆಕಟ್ಟೆ ಬಳಿ ಭಾನುವಾರ ಮೃತದೇಹ ಪತ್ತೆಯಾಗಿದೆ.
ಈ ಹಿಂದೆ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದ ವೀಟಾ ಬಳಿಕ ಹುದ್ದೆ ತೊರೆದು ವಿಮಾ ಪ್ರತಿನಿಧಿಯಾಗಿ ಗುರುತಿಸಿಕೊಂಡಿದ್ದರು. ಬಂಟ್ವಾಳ ಗ್ರಾಮಾಂತರ ಠಾಣೆ ಮಹಿಳಾ ಎಸ್‌ಐ ಭಾರತಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದೆ.