ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ: ಶಿವಾಜಿ ರಾವ್ ಬಂಧನ

Advertisement

ದಾವಣಗೆರೆ: ಜೀವ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಾಹಿತಿಗಳಿಗೆ ಅನಾಮಧೇಯ ಪತ್ರ ಬರೆಯುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಶಿವಾಜಿ ರಾವ್‌ ಜಾಧವ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಖ್ಯಾತ ಸಾಹಿತಿಗಳಾದ ಕುಂ.ವೀರಭದ್ರಪ್ಪ, ಬಂಜಗೆರೆ ಜಯಪ್ರಕಾಶ್, ಬಿ.ಎಲ್.ವೇಣು, ಬಿ.ಟಿ.ಲಲಿತಾ ನಾಯಕ್‌, ವಸುಂಧರ ಭೂಪತಿ ಸೇರಿದಂತೆ ಕೆಲವು ಸ್ವಾಮೀಜಿಗಳಿಗೆ ಅನಾಮಧೇಯ ಹೆಸರಿನಲ್ಲಿ ಜೀವ ಬೆದರಿಕೆ ಪತ್ರಗಳು ಬಂದಿದ್ದವು. ಈ ಪತ್ರಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು, ಇದರ ಹಿಂದಿರುವವರನ್ನು ಪತ್ತೆ ಹಚ್ಚಲು ಸಿಸಿಬಿಗೆ ತನಿಖೆಗೆ ವಹಿಸಿತ್ತು. ಪತ್ರಗಳು ನಿರಂತರವಾಗಿ ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ದಾವಣಗೆರೆ ಸೇರಿದಂತೆ ಕೆಲವೆಡೆ ಕಾರ್ಯಾಚರಣೆ ನಡೆಸಿದ ಸಿಸಿಬಿ, ಪತ್ರ ಬರೆದಿರುವ ಶಂಕೆಯ ಮೇರೆಗೆ 8 ಮಂದಿಯನ್ನು ವಶಕ್ಕೆ ಪಡೆದಿತ್ತು. ಈ ಪೈಕಿ ಶಿವಾಜಿ ರಾವ್‌ ಜಾಧವ್ ಮೇಲೆ ಸಿಸಿಬಿಗೆ ಪ್ರಬಲ ಗುಮಾನಿ ವ್ಯಕ್ತವಾಗಿತ್ತು.
ಸುಮಾರು ಎರಡು ವರ್ಷಗಳಿಂದ ಕೊಲೆ ಬೆದರಿಕೆ ಪತ್ರ ಬರೆಯುತ್ತಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಸಿಸಿಬಿ ಎಸಿಪಿ ನವೀನ್ ಕುಲಕರ್ಣಿ ಮತ್ತು ತಂಡ ದಾವಣಗೆರೆಯಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.