ರಾಜ್ಯೋತ್ಸವ ಪುರಸ್ಕೃತ ಸಾಲುಮರದ ವೀರಾಚಾರ್ ನೇಣಿಗೆ ಶರಣು

Advertisement


ದಾವಣಗೆರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಸಾಲುಮರದ ವೀರಾಚಾರ್(70) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆ ಮತ್ತು ಹರಿಹರ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಲುಮರದ ನೆಟ್ಟು ಘೋಷಿಸುತ್ತಿದ್ದ ಅವರ ಪರಿಸರ ಕಾಳಜಿಗೆ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು.
ಮಿಟ್ಲಕಟ್ಟೆ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ವಿಚಾರವಾಗಿ ಗ್ರಾಮಸ್ಥರೊಂದಿಗೆ ಹಲವಾರು ಬಾರಿ ಹೋರಾಟ ನಡೆಸಿದ್ದರು. ನ್ಯಾಯಬೆಲೆ ಅಂಗಡಿಯನ್ನು ಬೇರೆಯವರಿಗೆ ವಹಿಸಬೇಕು ಎಂಬುದು ಅವರ ಒತ್ತಾಯವಾಗಿತ್ತು.
ಆದರೆ, ಈಡೇರಲಿಲ್ಲ ಎಂಬ ಕಾರಣಕ್ಕೆ ಮನನೊಂದು ಸೋಮವಾರ ತಡರಾತ್ರಿ ಗ್ರಾಮದ ಮಧ್ಯ ದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಲುಮರದ ವೀರಾಚಾರ್ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೇಡಿಕೆಗೆ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ನ್ಯಾಯ ಒದಗಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗು, ಅಪಾರ ಬಂಧು ಬಳಗ ಅಗಲಿದ್ದಾರೆ.