ನಮ್ಮದು ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ

Advertisement

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಲಿತ ಸಂಘಟನೆಗಳ ಮುಖಂಡರೊಂದಿಗೆ 2024-25ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕದಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 2008ರಿಂದ 2013ರವರೆಗೆ 22,000 ಕೋಟಿ ರೂ.ಗಳು ವೆಚ್ಚವಾಗಿದೆ. 2013ರಿಂದ 2018ರವರೆಗೆ 88 ಸಾವಿರ ಕೋಟಿ ರೂ.ಗಳು ವೆಚ್ಚವಾಗಿದೆ.
ಹೆಚ್ಚು ದುರುಪಯೋಗವಾಗುತ್ತದೆ ಎಂಬ ಕಾರಣದಿಂದ 7ಡಿ ಯನ್ನು ತೆಗೆದುಹಾಕಿ ಆದೇಶವನ್ನು ಹೊರಡಿಸಿದೆ. ಯಾವುದೇ ಆರ್ಥಿಕ ವರ್ಷದಲ್ಲಿ ಹಣ ಖರ್ಚಾಗದಿದ್ದರೆ ಮುಂದಿನ ವರ್ಷಕ್ಕೆ ಮುಂದುವರೆಯುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ದಿಂದ ದುರುಪಯೋಗವಾದರೆ ಕ್ರಿಮಿನಲ್ ಮೊಕದ್ದಮೆ ಹೂಡಬಹುದು. ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಖರ್ಚು ಮಾಡಬೇಕು ಎಂದು ಆಂಧ್ರಪ್ರದೇಶ ಹಾಗೂ ಕರ್ನಾಟಕ ದಲ್ಲಿ ಕಾಯ್ದೆ ತರಲಾಗಿದೆ. ಇದು ಇಡೀ ದೇಶದಲ್ಲಿ ಆಗಬೇಕು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯಲ್ಲಿ ಪ್ರಮುಖ ಯೋಜನೆಯಾಗಬೇಕೆಂದು ಸೂಚಿಸಿದೆ ಎಂದರು.
ಬಡ್ತಿಯಲ್ಲಿ ಮೀಸಲಾತಿ ಕಾಯ್ದೆ ಮಾಡಿದ್ದು ಇಡೀ ದೇಶದಲ್ಲಿ ಕರ್ನಾಟಕ ಮಾತ್ರ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡಿದೆ. ಎಸ್‌ಸಿ, ಎಸ್‌ಟಿ ಜನಾಂಗದವರಿಗೆ ಗುತ್ತಿಗೆಯಲ್ಲಿ 1 ಕೋಟಿ ವರೆಗೆ ಮೀಸಲಾತಿ ನೀಡಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಲು ಈ ಕ್ರಮಗಳನ್ನು ಕೈಗೊಂಡಿದೆ ಎಂದರು.
7% ಪರಿಶಿಷ್ಟ ವರ್ಗದವರಿದ್ದಾರೆ, 17.15% ಪರಿಶಿಷ್ಟ ಜಾತಿಯವರಿದ್ದಾರೆ. 21.1% ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಕೆಲಸದಲ್ಲಿ ಅನುದಾನ ನೀಡಿದೆ.
ಬಿಜೆಪಿ ಸರ್ಕಾರದಲ್ಲಿ ಬಜೆಟ್ ಗಾತ್ರ ಹೆಚ್ಚಾದರೂ ಎಸ್.ಸಿ, ಎಸ್‌ಪಿ/ಟಿಎಸ್‌ಪಿ ಅನುದಾನ ಹೆಚ್ಚಾಗಿರಲಿಲ್ಲ. ಇದನ್ನು ಗುರುತಿಸಬೇಕು. ನಮ್ಮ ಸರ್ಕಾರ ಸಾಮಾಜಿಕ ಬದ್ಧತೆಯುಳ್ಳ ಸರ್ಕಾರ ಎಂದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.