ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈಓವರ್ ಮೇಲಿಂದ ಜಿಗಿದು ನವ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ನವೀನ್ (30) ಜ್ಞಾನಭಾರತಿ ನಿವಾಸಿಯಾಗಿದ್ದು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ದಲ್ಲಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದನು. ಈ ಘಟನೆ ಬೆಳಗಿನ ಜಾವ ನಡೆದಿದ್ದು ಬೆಳಗ್ಗೆ 8:20ರ ಸುಮಾರಿಗೆ ಫ್ಲೈಓವರ್ ಮೇಲೆ ಬೈಕ್ ಪಾರ್ಕ್ ಮಾಡಿ, ಏಕಾಏಕಿ ಕೆಳಗೆ ಜಿಗಿದಿದ್ದಾನೆ. ನವೀನ್ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದನು. ಬೆಳಗ್ಗೆ ಕಛೇರಿ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ನವೀನ್ ಫ್ಲೈಓವರ್ ಮೇಲಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಟರಾಯನಪುರ ಸಂಚಾರ ಪೊಲೀಸರು ಕೂಡಲೆ ನವೀನ್ ಬಳಿ ಧಾವಿಸಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.